ಧರ್ಮಸ್ಥಳದ ಕುರಿತು ಅಪಪ್ರಚಾರ ಮಾಡಿ ರಾಜ್ಯದ ಜನರಲ್ಲಿ ಗೊಂದಲ ಮೂಡಿಸಿದ ಆರೋಪದ ಮೇಲೆ ಗಿರೀಶ್ ಮಟ್ಟಣ್ಣನವರ್, ಮಹೇಶ್ ತಿಮ್ಮರೋಡಿ ಹಾಗೂ ಎಂ.ಡಿ. ಸಮೀರ್ ವಿರುದ್ಧ ಧರ್ಮಸ್ಥಳ ಉಪ ಪೊಲೀಸ್ ಠಾಣೆಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ದೂರು ನೀಡಿದ್ದಾರೆ. ಸಮಾಜದ ಸ್ವಾಸ್ಥ್ಯ ಕಾಪಾಡಲು ಈ ಮೂವರನ್ನು ಕೂಡಲೇ ಬಂಧಿಸಬೇಕೆಂದು ಅವರು ಆಗ್ರಹಿಸಿದ್ದಾರೆ.
ದೂರಿನ ಪ್ರಕಾರ, ಸುಜಾತಾ ಭಟ್ ಎಂಬುವವರಿಗೆ ಅನನ್ಯಾ ಭಟ್ ಎಂಬ ಮಗಳಿಲ್ಲದಿದ್ದರೂ, ಧರ್ಮಸ್ಥಳದಲ್ಲಿ ಅನನ್ಯಾ ಎಂಬ MBBS ವಿದ್ಯಾರ್ಥಿನಿಯನ್ನು ಅಪಹರಿಸಿ, ಅತ್ಯಾಚಾರ ಎಸಗಿ ಕೊಲೆ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ. ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗಡೆ ಮತ್ತು ಅವರ ಸಹೋದರ ಹರ್ಷೇಂದ್ರ ಹೆಗಡೆ ಈ ಕೃತ್ಯದಲ್ಲಿ ಭಾಗಿಯಾಗಿದ್ದಾರೆಂದು ಸುಳ್ಳು ಸುದ್ದಿ ಹರಡಲಾಗಿದೆ.
ಪೊಲೀಸರಿಗೆ ದೂರು ನೀಡಲು ಮುಂದಾದಾಗ, ಪೊಲೀಸರು ದೂರು ಸ್ವೀಕರಿಸದೆ ಸುಜಾತಾ ಭಟ್ ಅವರಿಗೆ ಬೆದರಿಕೆ ಹಾಕಿದರು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಜೊತೆಗೆ, ನಾಲ್ಕು ಜನ ಸೇರಿ ಸುಜಾತಾ ಅವರ ಮೇಲೆ ಹಲ್ಲೆ ನಡೆಸಿದ್ದು, ಮೂರು ತಿಂಗಳು ಕೋಮಾಗೆ ಹೋದರು ಎಂಬ ಸುಳ್ಳು ದೂರನ್ನು ನೀಡಿ ರಾಜ್ಯದ ಜನರಲ್ಲಿ ಭಯದ ವಾತಾವರಣ ಸೃಷ್ಟಿಸಿದ್ದಾರೆ ಎನ್ನಲಾಗಿದೆ. ಈ ರೀತಿಯ ಸುಳ್ಳು ಆರೋಪಗಳಿಂದ ರಾಜ್ಯದ ಜನರಿಗೆ ವಂಚನೆ ಮಾಡಲಾಗಿದ್ದು, ಧಾರ್ಮಿಕ ಕ್ಷೇತ್ರದ ಘನತೆಗೆ ಧಕ್ಕೆ ತರಲಾಗಿದೆ. ಲಕ್ಷಾಂತರ ಜನರ ನಂಬಿಕೆ ಮತ್ತು ಗೌರವಕ್ಕೆ ಚ್ಯುತಿ ಉಂಟಾಗಿದೆ ಎಂದು ಸ್ನೇಹಮಯಿ ಕೃಷ್ಣ ತಮ್ಮ ದೂರಿನಲ್ಲಿ ತಿಳಿಸಿದ್ದಾರೆ.
Bata Women's Block Heel Sandal
ಅಲ್ಲದೆ, 2007ರಲ್ಲಿ ಮೃತಪಟ್ಟ ಶ್ರೀಮತಿ ವಾಸಂತಿ ಅವರ ಭಾವಚಿತ್ರವನ್ನು ಅನನ್ಯಾ ಭಟ್ ಅವರದ್ದು ಎಂದು ಬಿಂಬಿಸಿ, ಅವರ ಮೇಲೆ ಅತ್ಯಾಚಾರ ಮತ್ತು ಕೊಲೆಯಾಗಿದೆ ಎಂದು ಸುಳ್ಳು ಹೇಳುವ ಮೂಲಕ ವಾಸಂತಿ ಅವರ ಗೌರವಕ್ಕೆ ಧಕ್ಕೆ ತರಲಾಗಿದೆ ಎಂದು ದೂರಿನಲ್ಲಿ ವಿವರಿಸಲಾಗಿದೆ. ಆದ್ದರಿಂದ, ಸುಜಾತಾ ಭಟ್, ಗಿರೀಶ್ ಮಟ್ಟಣ್ಣನವರ್, ಮಹೇಶ್ ಶೆಟ್ಟಿ ತಿಮ್ಮರೋಡಿ, ಎಂ.ಡಿ. ಸಮೀರ್ ಮತ್ತು ಅವರೊಂದಿಗೆ ಶಾಮೀಲಾದವರ ವಿರುದ್ಧ ಮೊಕದ್ದಮೆ ದಾಖಲಿಸಿ, ಬಂಧಿಸಿ ಸಮಾಜದ ಸ್ವಾಸ್ಥ್ಯ ಕಾಪಾಡಬೇಕೆಂದು ದೂರಿನಲ್ಲಿ ಮನವಿ ಮಾಡಲಾಗಿದೆ.