ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಇತ್ತೀಚೆಗೆ ಸೌಜನ್ಯ ನಿವಾಸಕ್ಕೆ ಭೇಟಿ ನೀಡಿದ ಘಟನೆ, ಪಕ್ಷದೊಳಗೆ ತೀವ್ರ ಆಕ್ಷೇಪಕ್ಕೆ ಕಾರಣವಾಗಿದೆ. 'ಧರ್ಮಸ್ಥಳ ಚಲೋ' ಕಾರ್ಯಕ್ರಮದ ಭಾಗವಾಗಿ ಸೌಜನ್ಯ ಅವರ ಕುಟುಂಬವನ್ನು ಭೇಟಿ ಮಾಡಲು ನಿರ್ಧರಿಸಿದ ಕೊನೆಯ ಕ್ಷಣದ ಕ್ರಮವು ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ.
ವಿಜಯೇಂದ್ರ ಅವರು ದಕ್ಷಿಣ ಕನ್ನಡ ಸಂಸದ ಬ್ರಿಜೇಶ್ ಚೌಟ ಮತ್ತು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರೊಂದಿಗೆ ಸೌಜನ್ಯ ಅವರ ತಾಯಿ ಕುಸುಮಾವತಿ ಅವರನ್ನು ಭೇಟಿ ಮಾಡಿದ್ದರು. ಈ ಸಂದರ್ಭದಲ್ಲಿ, ಸೌಜನ್ಯ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸುವುದಾದರೆ, ಅಗತ್ಯ ಕಾನೂನು ನೆರವು ನೀಡುವುದಾಗಿ ಭರವಸೆ ನೀಡಿದ್ದರು.
ಆದರೆ, ಈ ಭೇಟಿಯ ನಿರ್ಧಾರವನ್ನು ವಿಜಯೇಂದ್ರ ಅವರು ಕೊನೆಯ ಕ್ಷಣದಲ್ಲಿ ಕೈಗೊಂಡಿದ್ದು, ಉಳಿದ ಹಿರಿಯ ನಾಯಕರಿಗೆ ಮಾಹಿತಿ ರವಾನಿಸುವಷ್ಟರಲ್ಲಿ ಅವರು ಧರ್ಮಸ್ಥಳದಿಂದ ಬೆಂಗಳೂರಿನತ್ತ ಪ್ರಯಾಣ ಬೆಳೆಸಿದ್ದರು. ಪ್ರಹ್ಲಾದ್ ಜೋಶಿ, ಆರ್. ಅಶೋಕ್, ಛಲವಾದಿ ನಾರಾಯಣಸ್ವಾಮಿ, ವಿ. ಸುನೀಲ್ ಕುಮಾರ್, ಡಿ.ವಿ. ಸದಾನಂದ ಗೌಡ ಬೆಂಗಳೂರಿನತ್ತ ತೆರಳಿದ್ದರೆ, ನಳೀನ್ ಕುಮಾರ್ ಕಟೀಲ್ ಮಂಗಳೂರಿನತ್ತ ಹೊರಟಿದ್ದರು.
ಪಕ್ಷದಲ್ಲಿ ಪೂರ್ವಭಾವಿ ಚರ್ಚೆ ನಡೆಸದೆ ವಿಜಯೇಂದ್ರ ಏಕಾಏಕಿ ಈ ನಿರ್ಧಾರ ತೆಗೆದುಕೊಂಡಿದ್ದು, ಹಲವು ನಾಯಕರ ಅಸಮಾಧಾನಕ್ಕೆ ಕಾರಣವಾಗಿದೆ. ಕೆಲವರು, ಧಾರ್ಮಿಕ ಕೇಂದ್ರದ ಪರವಾಗಿ ಸಮಾವೇಶ ನಡೆಸಿದ ನಂತರ ಸೌಜನ್ಯ ನಿವಾಸಕ್ಕೆ ಭೇಟಿ ನೀಡುವ ಅಗತ್ಯವೇನಿತ್ತು ಎಂಬ ಆಂತರಿಕ ಆಕ್ಷೇಪವನ್ನೂ ಎತ್ತಿದ್ದಾರೆ.
ಸಮಾವೇಶದಲ್ಲಿ ಕರಾವಳಿ ಭಾಗದ ಬಿಜೆಪಿ ನಾಯಕರಿಗೆ ಭಾಷಣ ಮಾಡಲು ಅವಕಾಶ ಸಿಗದ ವಿಷಯವೂ ಗಮನ ಸೆಳೆದಿದೆ. ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ, ಮಾಜಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಮತ್ತು ಶಾಸಕ ಸುನೀಲ್ ಕುಮಾರ್ ಸೇರಿದಂತೆ ದಕ್ಷಿಣ ಕನ್ನಡ ಹಾಗೂ ಉಡುಪಿ ಮೂಲದ ನಾಯಕರು ವೇದಿಕೆಯಲ್ಲಿದ್ದರೂ ಅವರಿಗೆ ಮಾತನಾಡುವ ಅವಕಾಶ ಸಿಗಲಿಲ್ಲ. ಇದಕ್ಕೆ ಬಿಜೆಪಿ ಸಮಯದ ಕೊರತೆ ಎಂದು ಸಮಜಾಯಿಷಿ ನೀಡಿದೆ.
ಈ ನಡುವೆ, ಆಡಳಿತಾರೂಢ ಕಾಂಗ್ರೆಸ್ ಬಿಜೆಪಿ ನಾಯಕರ ಧರ್ಮಸ್ಥಳ ಭೇಟಿಯ ಬಗ್ಗೆ ಪ್ರಶ್ನೆಗಳನ್ನು ಎತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಇಷ್ಟು ದೊಡ್ಡ ಸಮಾವೇಶಕ್ಕೆ ಹಣ ಎಲ್ಲಿಂದ ಬಂತು ಎಂದು ಕೇಳಿದ್ದಾರೆ. ಗೃಹ ಸಚಿವ ಡಾ. ಜಿ. ಪರಮೇಶ್ವರ್, ಸೌಜನ್ಯ ಪ್ರಕರಣವನ್ನು ಎಸ್ಐಟಿ ತನಿಖೆಯಿಂದ ಎನ್ಐಎಗೆ ವರ್ಗಾಯಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.