ಬೆಂಗಳೂರು (ಸೆ.05): ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ನೂತನ ನಿರ್ದೇಶಕರ ಹುದ್ದೆಗೆ ಡಾ.ದಿನೇಶ್ ಅವರ ಹೆಸರು ಅಂತಿಮವಾಗಿ ನಿರ್ಧರಿಸಲಾಗಿದೆ, ಮುಖ್ಯಮಂತ್ರಿ ಸಿದ್ದರಾಮಯ್ಯ ರವರ ಅಧ್ಯಕ್ಷತೆಯಲ್ಲಿ ನಡೆದ ವಿಶೇಷ ಆಡಳಿತ ಮಂಡಳಿ ಸಭೆಯಲ್ಲಿ ನಿರ್ಧರಿಸಲಾಗಿದೆ. ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ಹಾಲಿ ನಿರ್ದೇಶಕ ಡಾ.ಕೆ.ಎಸ್.ರವೀಂದ್ರನಾಥ್ ರವರ ಅವಧಿಯು ಮುಕ್ತಾಯವಾಗುತ್ತಿರುವ ಹಿನ್ನೆಲೆಯಿಂದ ಹೊಸ ನಿರ್ದೇಶಕರ ನೇಮಕವನ್ನು ಮಾಡಬೇಕಿದೆ.
ವಿಧಾನಸೌಧದಲ್ಲಿ ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯರವರು ವಿಶೇಷ ಸಭೆ ನಡೆಸಲಾಯಿತು. ಆ ಸಭೆಯಲ್ಲಿ ನಿರ್ದೇಶಕರ ಹುದ್ದೆಗೆ ಅರ್ಜಿ ಸಲ್ಲಿಸಿದ್ದ 11 ಹಿರಿಯ ವೈದ್ಯರಲ್ಲಿ 10 ಜನರನ್ನು ಸಂದರ್ಶನಕ್ಕೊಳಪಡಿಸಲಾಯಿತು. ಡಾ.ದಿನೇಶ್, ಡಾ.ಎಂ.ದಿವ್ಯಾ ಪ್ರಕಾಶ್, ಡಾ.ಬಿ.ಗಿರೀಶ್, ಡಾ.ಎಸ್.ಜಯಪ್ರಕಾಶ್, ಡಾ.ವಿ.ಕುಮಾರಸ್ವಾಮಿ, ಡಾ.ಎ.ಸಿ.ನಾಗಮಣಿ, ಡಾ.ಸಿ.ಜಿ.ಪ್ರಭುಶಂಕರ್, ಡಾ.ಎಂ.ಪ್ರಸನ್ನ ಸಿಂಹ ಮತ್ತು ಡಾ.ವೇಣುಗೋಪಾಲ್ ರಾಮ್ರಾವ್ ಸಂದರ್ಶನದಲ್ಲಿ ಪಾಲ್ಗೊಂಡಿದ್ದರು. ಉಳಿದಂತೆ ಡಾ.ಸತೀಶ್ ಗೋವಿಂದಯ್ಯರವರು ಸಂದರ್ಶನಕ್ಕೆ ಗೈರಾಗಿದ್ದರು.
ಈ ಸಂದರ್ಶನದಲ್ಲಿ ನೂತನ ನಿರ್ದೇಶಕರ ಹುದ್ದೆಗೆ ಡಾ.ದಿನೇಶ್ ಅವರ ಹೆಸರನ್ನು ಅಂತಿಮಗೊಳಿಸಲಾಗಿದೆ. ಆದರೆ, ನಿರ್ದೇಶಕ ಹುದ್ದೆಗೆ ಸಂಬಂಧಿಸಿ ಹೈಕೋರ್ಟ್ನಲ್ಲಿ ತಡೆಯಾಜ್ಞೆ ಇರುವ ಕಾರಣದಿಂದಾಗಿ ಅಧಿಕೃತವಾಗಿ ಘೋಷಣೆ ಮಾಡಿಲ್ಲ. ಮಂಡಳಿ ಸಭೆಯ ನಿರ್ಣಯವನ್ನು ಹೈಕೋರ್ಟ್ಗೆ ಸರ್ಕಾರ ಸಲ್ಲಿಸಲಿದ್ದು, ಹೈಕೋರ್ಟ್ ನೀಡುವ ಆದೇಶದಂತೆ ನಿರ್ದೇಶಕ ಹುದ್ದೆ ಹೆಸರನ್ನು ಘೋಷಿಸಲು ನಿರ್ಧರಿಸಲಾಗಿದೆ.