ಗಂಗಾವತಿ (ಸೆ.10): ಕೊಪ್ಪಳ ಜಿಲ್ಲೆಯ ಗಂಗಾವತಿಯ ಬಿಬಿಸಿ ನರ್ಸಿಂಗ್ ಕಾಲೇಜಿನಲ್ಲಿ ನಡೆದ ಒಂದು ವಿಚಿತ್ರ ಮತ್ತು ಆಘಾತಕಾರಿ ಘಟನೆ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಕಾಲೇಜು ಶುಲ್ಕದ ಬಾಕಿ ಮೊತ್ತವನ್ನು ಪಾವತಿಸದಿದ್ದಕ್ಕೆ ಕಾಲೇಜಿನ ಚೇರ್ಮನ್, ವಿದ್ಯಾರ್ಥಿನಿಯ ತಾಯಿಯ ತಾಳಿಯನ್ನೇ ಒತ್ತೆಯಾಗಿಟ್ಟುಕೊಂಡ ಆರೋಪ ಕೇಳಿ ಬಂದಿದೆ.
ಕನಕಗಿರಿ ತಾಲೂಕಿನ ಮುಸ್ಲಾಪೂರ ಗ್ರಾಮದ ಕಾವೇರಿ ವಾಲಿಕಾರ್ ಎಂಬ ವಿದ್ಯಾರ್ಥಿನಿ ಗಂಗಾವತಿಯ ಬಿಬಿಸಿ ನರ್ಸಿಂಗ್ ಕಾಲೇಜಿನಲ್ಲಿ ಬಿಎಸ್ಸಿ ನರ್ಸಿಂಗ್ಗೆ ಅಡ್ಮಿಶನ್ ಪಡೆದಿದ್ದಳು. ಅಡ್ಮಿಶನ್ ಸಮಯದಲ್ಲಿ ಕಾವೇರಿಯ ಪೋಷಕರು ಕೇವಲ 10,000 ರೂ. ಮಾತ್ರ ಪಾವತಿಸಿದ್ದರು ಮತ್ತು ಉಳಿದ 90,000 ರೂ. ಬಾಕಿಯನ್ನು ಆದಷ್ಟು ಬೇಗ ಕೋಡುತ್ತೇವೆ ಎಂದು ಭರವಸೆ ನೀಡಿದ್ದರು. ಆದರೆ, ಇತ್ತೀಚೆಗೆ ಕಾವೇರಿಗೆ ಗದಗಿನ ಸರಕಾರಿ ನರ್ಸಿಂಗ್ ಕಾಲೇಜಿನಲ್ಲಿ ಸೀಟು ದೊರೆತ ಕಾರಣ, ಅವರು ಬಿಬಿಸಿ ಕಾಲೇಜಿನಿಂದ ಟಿಸಿ ಕೇಳಿದ್ದಾರೆ.
ಕೇರಳದ ರಾಜಕೀಯ ರಂಗದಲ್ಲಿ ಬುರುಡೆ ಆಟ:ಕಮ್ಯುನಿಸ್ಟ್ ನಾಯಕ ಸೂತ್ರಧಾರಿಯೋ ಅಥವಾ ಪಾತ್ರಧಾರಿಯೋ?
ಕಾವೇರಿಯ ಪೋಷಕರು ಟಿಸಿ ಕೇಳಿದಾಗ, ಕಾಲೇಜು ಚೇರಮನ್ ಡಾ ಚಿನಿವಾಲ ಉಳಿದ 90,000 ರೂ. ಪಾವತಿಸಿದರೆ ಮಾತ್ರ ಟಿಸಿ ನೀಡುತ್ತೇನೆ ಇಲ್ಲವಾದರೆ ಕೊಡಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಆದರೆ ಸದ್ಯ ಕುಟುಂಬದ ಆರ್ಥಿಕ ಪರಿಸ್ಥಿತಿಯಿಂದ ಹಣ ಪಾವತಿಸಲು ಸಾಧ್ಯವಿಲ್ಲ ಎಂದು ಕಾವೇರಿಯ ಪೋಷಕರು ತಿಳಿಸಿದ್ದಾರೆ. ಇದಕ್ಕೆ ಚೇರಮನ್ ಡಾ. ಚಿನಿವಾಲ, 'ಹಣ ಇಲ್ಲದಿದ್ದರೆ ನಿಮ್ಮ ಮೈಮೇಲಿರುವ ಬಂಗಾರವನ್ನಾದರೂ ಕೊಡಿ ಎಂದು ಒತ್ತಾಯಿಸಿದ್ದಾರೆ ಎನ್ನಲಾಗಿದೆ. ಈ ಒತ್ತಡದಿಂದಾಗಿ ಕಾವೇರಿಯ ತಾಯಿ ತಮ್ಮ ತಾಳಿಯನ್ನೇ ಬಿಚ್ಚಿಕೊಟ್ಟು ಟಿಸಿಯನ್ನು ಪಡೆದುಕೊಂಡಿದ್ದಾರೆ.
ಕಾವೇರಿಯ ತಾಯಿ ಘಟನೆ ಬಗ್ಗೆ ಮಾತನಾಡಿದ್ದು, 'ಮಗಳ ಶುಲ್ಕಕ್ಕಾಗಿ ತಾಳಿ ಕೇಳಿದಾಗ, ಬೇರೆ ದಾರಿಯಿಲ್ಲದೇ ನನ್ನ ತಾಳಿಯನ್ನೇ ಕೊಟ್ಟೆ, ದುಃಖದಲ್ಲಿ ಕಣ್ಣೀರು ಹಾಕುತ್ತಾ ಅವರು ದುಡ್ಡಿನ ಆಸೆಗಾಗಿ ಕೊರಳಿನಲ್ಲಿರುವ ತಾಳಿಯನ್ನೇ ಕೇಳಿದ್ದಾರೆ ಎಂದು ಹೇಳಿಕೊಂಡಿದ್ದಾರೆ. ಈ ಘಟನೆಯಿಂದ ಕಾವೇರಿಯ ಕುಟುಂಬ ಮತ್ತು ಸ್ಥಳೀಯರು ಡಾ ಚಿನಿವಾಲ ವಿರುದ್ಧ ತೀವ್ರ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. ತಾಳಿಯಂತಹ ಪವಿತ್ರವಾದ ಆಭರಣವನ್ನು ಶುಲ್ಕಕ್ಕಾಗಿ ಒತ್ತೆಯಾಗಿ ಕೇಳುವ ಚೇರಮನ್ರ ನಡವಳಿಕೆ ಮತ್ತು ಮನಸ್ಥಿತಿಯ ಬಗ್ಗೆ ಸಾರ್ವಜನಿಕರು ತೀವ್ರ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.
ಈ ಘಟನೆಯಿಂದ ಕಾಲೇಜಿನ ಆಡಳಿತದ ವಿರುದ್ಧ ಸ್ಥಳೀಯರಲ್ಲಿ ಆಕ್ರೋಶ ಹೆಚ್ಚಾಗಿದ್ದು, ಶಿಕ್ಷಣ ಸಂಸ್ಥೆಯೊಂದು ಇಂತಹ ಅಮಾನವೀಯ ಕೃತ್ಯದಲ್ಲಿ ತೊಡಗಿರುವುದಕ್ಕೆ ಸಾಮಾಜಿಕ ಜಾಲತಾಣಗಳಲ್ಲೂ ವ್ಯಾಪಕ ಚರ್ಚೆ ಆರಂಭವಾಗಿದೆ. ಈ ಬಗ್ಗೆ ಕಾನೂನು ಕ್ರಮ ಕೈಗೊಳ್ಳಬೇಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ.