ಅನಾರೋಗ್ಯದಿಂದ ಬಳಲುತ್ತಿದ್ದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಂ.ಎಸ್. ರಾಮಯ್ಯ ಆಸ್ಪತ್ರೆಯಿಂದ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಅವರಿಗೆ ಯಶಸ್ವಿಯಾಗಿ ಪೇಸ್ಮೇಕರ್ ಅಳವಡಿಸಲಾಗಿದ್ದು, ಸದ್ಯ ಅವರು ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ.
ಅಕ್ಟೋಬರ್ 2ರಂದು ರಾತ್ರಿ ಮಲ್ಲಿಕಾರ್ಜುನ ಖರ್ಗೆ ಅವರನ್ನು ಬೆಂಗಳೂರಿನ ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಉಸಿರಾಟದ ತೊಂದರೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ವೈದ್ಯರ ಸಲಹೆ ಮೇರೆಗೆ ಪೇಸ್ಮೇಕರ್ ಅಳವಡಿಕೆಗಾಗಿ ಅವರು ಆಸ್ಪತ್ರೆ ಸೇರಿದ್ದರು. ಅವರ ಆರೋಗ್ಯ ಸ್ಥಿರವಾಗಿದ್ದು, ಶೀಘ್ರದಲ್ಲೇ ತಮ್ಮ ಕರ್ತವ್ಯಕ್ಕೆ ಮರಳುವ ನಿರೀಕ್ಷೆಯಿದೆ ಎಂದು ಕಾಂಗ್ರೆಸ್ ತಿಳಿಸಿದೆ.
ಕಾಂಗ್ರೆಸ್ ಪಕ್ಷವು ತಮ್ಮ ಅಧಿಕೃತ ಪ್ರಕಟಣೆಯಲ್ಲಿ ಖರ್ಗೆ ಜಿ ಚೆನ್ನಾಗಿದ್ದಾರೆ. ನಿಮ್ಮೆಲ್ಲರ ಶುಭ ಹಾರೈಕೆ ಮತ್ತು ಬೆಂಬಲಕ್ಕೆ ಧನ್ಯವಾದಗಳು. ಶೀಘ್ರವೇ ತಮ್ಮ ಚಟುವಟಿಕೆಗಳನ್ನು ಪುನಾರಂಭಿಸುವ ನಿರೀಕ್ಷೆಯಿದೆ, ಎಂದು ಹೇಳಿದೆ.
ಮಲ್ಲಿಕಾರ್ಜುನ ಖರ್ಗೆ ಕೂಡ ಟ್ವೀಟ್ ಮೂಲಕ ಅಭಿಮಾನಿಗಳಿಗೆ ಧನ್ಯವಾದ ಸಲ್ಲಿಸಿದ್ದಾರೆ. ನನ್ನ ಆರೋಗ್ಯಕ್ಕಾಗಿ ಶುಭಾಶಯಗಳ ಮಹಾಪೂರವನ್ನೇ ಹಾರೈಸಿದ ಕಾಂಗ್ರೆಸ್ ಕಾರ್ಯಕರ್ತರು, ನಾಯಕರು ಮತ್ತು ಬೆಂಬಲಿಗರಿಗೆ ನನ್ನ ಹೃತ್ಪೂರ್ವಕ ಧನ್ಯವಾದಗಳು. ನನ್ನ ಆಳವಾದ ಕೃತಜ್ಞತೆಗಳು. ನಾನು ಶೀಘ್ರದಲ್ಲೇ ನನ್ನ ಕೆಲಸ ಕಾರ್ಯಗಳನ್ನು ಪ್ರಾರಂಭಿಸಲು ಉದ್ದೇಶಿಸಿದ್ದೇನೆ, ಎಂದು ಅವರು ತಿಳಿಸಿದ್ದಾರೆ.